ಈ ಪುಟವನ್ನು ಪ್ರಕಟಿಸಲಾಗಿದೆ

೧೦೦

ಜನಪದ ಕಥೆಗಳು

ಮಾತುಗಳಾವವೆಂದು ಕೇಳಿದನು. ಅವರು ಕ್ರಮವಾಗಿ ಹೀಗೆ ಹೇಳಿದರು ಕುರುಡನ ಕೋಣೆಯ ಕಾವಲುಗಾರ—"ಮನಸ್ಸಿನಂತೆ ಮಹಾದೇವ! ಮನಸ್ಸಿನಂತೆ ಮಹಾದೇವ! ಎನ್ನುತ್ತ ಕುಣಿದಾಡುತ್ತಿದ್ದನು ಆ ಕುರುಡ."

ಹೆಂಗಸಿನ ಕೋಣೆಯ ಕಾವಲುಗಾರ—"ಗಂಡನಪ್ಪಣೆ ಮೀರಬಾರದೆಂದು ತಂದೆಗೆ ಸಮಾನನಾದ ಆ ಕುರುಡ ಮುದುಕನ ಕೈಹಿಡಿದು ಸರಿದಾರಿಗೆ ಹಚ್ಚಿದರೆ, "ಹೆಂಡತಿ ಕೈಕೊಸರಿಕೊಂಡು ಓಡಿಹೋಗುವಳೋ ಅಪ್ಪಾ? ಎಂದು ಹೊಯ್ಕೊಂಡರೆ ನಾನೇನು ಹಣೆಹಣೆ ಗಟ್ಟಿಸಿಕೊಳ್ಳಲಾ? ಎಂಥ ವೇಳೆ ತಂದೆಯೋ ದೇವರೇ"

ಎನ್ನುತ್ತ ಆಕೆ ಬೆಳತನಕ ಗೋಳಾಡಿ ಅತ್ತಳು.

ಗಂಡನ ಕೋಣೆಯ ಕಾವಲುಗಾರ—"ಆ ಕುರುಡನನ್ನು ನೋಡಿ ನನಗೇಕೆ ದಯೆ ಬಂದಿತೋ ಏನೋ. ಆತನಿಗೆ ಸರಿದಾರಿಗೆ ಹಚ್ಚುವ ಕೆಲಸವನ್ನು ಹೆಂಡತಿಗೆ ಹೇಳದೆ ನಾನೇ ಮಾಡಿದ್ದರೆ ಎಷ್ಟು ಚೆನ್ನಾಗಿತ್ತಲ್ಲ!" ಎಂದು ಗಳಿಗೆಗೊಮ್ಮೆ ಮಿಡುಕುತ್ತಿದ್ದನು.

ಆ ಎಲ್ಲ ಹೇಳಿಕೆಗಳನ್ನು, ಕೇಳಿ ಗೌಡನು, ಆ ಹೆಣ್ಣು ಮಗಳು ಕುರುಡನ ಹೆಂಡತಿ ಅಲ್ಲವೆಂದು ನಿರ್ಣಯಿಸಿ ಆಕೆಯನ್ನು ಆಕೆಯ ಗಂಡನೊಡನೆ ಕಳಿಸಿದನು. ಕುರುಡ ಮುದುಕನನ್ನು ಬಯ್ದು ಬೆದರಿಸಿ ಊರಹೊರಗೆ ಹಾಕಿಸಿದನು.


 •